ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ 10 ವರ್ಷದ ಗಂಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ತಣಿಗೆಬೈಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ಆನೆಯ ದೇಹದ ಮೇಲೆ ವಿದ್ಯುತ್ ತಂತಿ ಸ್ಪರ್ಶಿಸಿರುವ ಗುರುತು ಪತ್ತೆಯಾಗಿದೆ. ಹಾಗಾಗಿ ಆನೆ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಆನೆ ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಓಡಾಡುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಕೂಡ ತಣಿಗೇಬೈಲು ವ್ಯಾಪ್ತಿಯಲ್ಲಿ ಕಾಡಾನೆ ಸಾವಿಗೀಡಾಗಿತ್ತು. ಆನೆಯ ಮರಣೋತ್ತರ ಪರೀಕ್ಷೆಯ ನಂತರ ಎರಡೂ ದಂತವನ್ನ ಹೊರತೆಗೆದಿದ್ದಾರೆ. ಸದ್ಯಕ್ಕೆ ತಣಿಗೇಬೈಲು ಅರಣ್ಯಾಧಿಕಾರಿ ಹಾಗೂ ಭದ್ರಾ ಹುಲಿ ಸಂರಕ್ಷಿತ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಯಿಂದ ಜಮೀನುಗಳಿಗೆ ಅಕ್ರಮ ವಿದ್ಯುತ್ ತಂತಿ ಅಳವಡಿಸಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.