ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ನಡೆದಿದೆ. ಸಾವಿತ್ರಿ ಗುಪ್ತಾ(47), ಶೋಭಾ ಗುಪ್ತಾ(27) ಹಾಗೂ ಆರತಿ ಗುಪ್ತಾ(21) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳ ಸಾವನ್ನಪ್ಪಿದ್ದು, ಸಾವಿತ್ರಿ ಗುಪ್ತಾ ಅವರ ಪತಿ, ಸಹೋದರ ಹಾಗೂ ಕಾರು ಚಾಲಕನಿಗೆ ಗಂಭಿರ ಗಾಯವಾಗಿದೆ.
ಗಾಯಾಳುಗಳನ್ನು ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಮತ್ತು ಗಾಯಾಳುಗಳು ಮುಂಬೈ ಮೂಲದವರಾಗಿದ್ದು, ಗೋವಾದಿಂದ ಹೊಸ ವರ್ಷಾಚರಣೆ ಮುಗಿಸಿ ಮುಂಬೈಗೆ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಸ್ಥಳಕ್ಕೆ ನಿಪ್ಪಾಣಿ ಶಹರ ಪಿಎಸ್ಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.