ಬೆಂಗಳೂರು: ಮೂವರು ಅಪರಿಚಿತರು ಬಿಎಂಟಿಸಿ ಬಸ್ಸಿನೊಳಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿಗೆ ಹೊಂದಿಕೊಂಡಿರುವ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಆಂಧ್ರ ಮೂಲದವರಾಗಿದ್ದು ಸುಮಾರು 32 ವರ್ಷದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಅತ್ತಿಬೆಲೆ ಕಡೆಯಿಂದ ಬಂದ ವ್ಯಕ್ತಿಯನ್ನು ಹಿಂಬಾಲಿಸಿ ಚಾಕುವಿನಿಂದ ಹೊಟ್ಟೆಗೆ ಇರಿದು ಕೊಲೆ ಮಾಡಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಬಳಿಯಿದ್ದ ಮೊಬೈಲ್ನಿಂದಲೂ ಯಾವುದೇ ಮಾಹಿತಿ ಸಿಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಹಳೇ ದ್ವೇಷದ ಮೇಲೆ ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ಈ ಘಟನೆ ನಡೆದಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ತರಲಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.