ಬೆಂಗಳೂರು: ಎಸ್ ಟಿ ಪಿ ಪ್ಲಾಂಟ್ ಶುಚಿಗೊಳಿಸಲು ಹೋಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸೋಮಸುಂದರ ಪಾಳ್ಯದ ಸಫಲ್ ಅಪಾರ್ಟ್ ಮೆಂಟ್ನಲ್ಲಿ ಘಟನೆ ನಡೆದಿದ್ದು, ಮೃತರು ಮಾದೇವಯ್ಯ, ನಾರಾಯಣಸ್ವಾಮಿ ಹಾಗೂ ಶ್ರೀನಿವಾಸ್ ಎಂದು ತಿಳಿದು ಬಂದಿದೆ.
ಮ್ಯಾನ್ ಹೋಲ್ಗಳನ್ನು ಶುಚಿಗೊಳಿಸಲು ಕಾರ್ಮಿಕರನ್ನು ಬಳಸಬಾರದೆಂದು ಸುಪ್ರೀಂ ಕೋರ್ಟ್ ನಿಷೇಧ ಹೇರಿದ್ದರೂ ಗುತ್ತಿಗೆದಾರರು ಯಂತ್ರವನ್ನು ಬಳಸದೆ ಖಾಸಗಿ ಕೂಲಿ ಕಾರ್ಮಿಕರನ್ನು ಪ್ಲಾಂಟ್ ನಲ್ಲಿ ಇಳಿಸಿದ್ದು, ಈ ವೇಳೆ ವಿಷಯುಕ್ತ ಗಾಳಿ ಸೇವಿಸಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಮೂರು ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪಾಲಿಕೆ ಸದಸ್ಯ ಗುರುಮೂರ್ತಿ ರೆಡ್ಡಿ ಹಾಗೂ ಶಾಸಕ ಸತೀಶ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ವೇಳೆ ಅಕ್ರೋಶಗೊಂಡ ಮೃತನ ಸಂಬಂಧಿಕರು ಅಪಾರ್ಟ್ ಮೆಂಟ್ ಅಸೋಸಿಯೇಷನ್ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.