ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಗುಲಸಿಂದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಸ್ತೆ ಕಾಮಗಾರಿ ಸರಿಯಾಗಿ ಮಾಡದೇ ಇರುವುದೇ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಜುನಾಥ್(33) ಮತ್ತು ಶೀಲಾ(30) ಅಪಘಾತದಲ್ಲಿ ಸಾವನ್ನಪ್ಪಿದ ದಂಪತಿ. ಅಪಘಾತದಲ್ಲಿ ಮೂರು ವರ್ಷದ ಮಗಳು ಇಂಪನಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸದ್ಯ ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು ಗುತ್ತಿಗೆದಾರರ ಬೇಜವಾಬ್ದಾರಿಯೇ ಅಪಘಾತಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪ ಮಾಡುತ್ತಿದ್ದಾರೆ.
ಶವಗಳನ್ನು ಪಟ್ಟಣದ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಇಟ್ಟು ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕಾರರು ಟೈರ್ ಸುಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಹಾಸನ-ಬೆಂಗಳೂರು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.