ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಶಿವಮೊಗ್ಗದಲ್ಲಿ ಬಂಡಾಯದ ಬಿಸಿಗೆ ಪಕ್ಷ ಬಳಲುತ್ತಿದೆ.
ಪಕ್ಷದ ಜಿಲ್ಲಾ ಅಧ್ಯಕ್ಷ ನಿರಂಜನ್ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಬುಗಿಲೆದ್ದಿದೆ. ಪಕ್ಷದ ಜಿಲ್ಲಾಧ್ಯಕ್ಷ ನಿರಂಜನ್ ಅಭ್ಯರ್ಥಿಯಾಗಿ ಘೋಷಣೆ ಆಗುತ್ತಿದ್ದಂತೆ ಟಿಕೆಟ್ ಅಕಾಂಕ್ಷಿಯಾಗಿದ್ದ ಕಾರ್ಪೊರೇಟರ್ ನರಸಿಂಹಮೂರ್ತಿ ಅವರನ್ನು ನಗರ ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆದಿದ್ದಾರೆ. ಇದು ನರಸಿಂಹಮೂರ್ತಿ ಸೇರಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.
ನಗರ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಂಡ ಬೆನ್ನಲ್ಲೇ ನರಸಿಂಹಮೂರ್ತಿ ನಾನು ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ ಎಂದು ಹೇಳಿದ್ದಾರೆ. ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ನಿರಂಜನ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ನರಸಿಂಹ ಮೂರ್ತಿ, ಪಕ್ಷದ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಕಾರ್ಯಕರ್ತರ ಜೊತೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ದೂರಿದ್ದಾರೆ.
ನಗರ ಘಟಕದ ಅಧ್ಯಕ್ಷ ಸ್ಥಾನದಿಂದ ಏಕಾಏಕಿ ತೆಗೆದು ಹಾಕಿದ್ದಾರೆ. ನಗರ ಘಟಕ ವಿಸರ್ಜನೆ ಮಾಡಿದ್ದಾರೆ. ಇದರಿಂದ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ನೋವಾಗಿದೆ. ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಹೇಳಿದ್ದಾರೆ. ನರಸಿಂಹಮುರ್ತಿ ಬಂಡಾಯದಿಂದಾಗಿ ಆರಂಭದಲ್ಲೇ ಜೆಡಿಎಸ್ ಭಿನ್ನಮತ ಎದುರಿಸುವಂತಾಗಿದೆ.