ಬಳ್ಳಾರಿ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಮಾಜಿ ಡಿವೈಎಸ್ಪಿ ಅಧಿಕಾರಿ ಅನುಪಮಾ ಶೆಣೈ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ರ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಬಳ್ಳಾರಿಯ ಖಾಸಗಿ ಹೋಟೆಲ್ವೊಂದರಲ್ಲಿ ಭೇಟಿ ಕಾರ್ಯಕ್ರಮ ನಡೆದಿದ್ದು, ಶೆಣೈ ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಅನುಪಮಾ ಶೆಣೈ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಬಿಜೆಪಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಹೀಗಾಗಿ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಇಬ್ಬರು ನಾಯಕರು ಮಾಧ್ಯಮಗಳ ಕಣ್ಣು ತಪ್ಪಿಸಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಹಿಂದೆ ಪೊಲೀಸ್ ಕೆಲಸ ಮಾಡುವಾಗ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದ್ದರು, ಆದರೆ ಈಗ ರಾಜಕಾರಣಿಗಳ ಮೇಲೆ ಪೊಲೀಸ್ ಪ್ರಯೋಗ ಮಾಡೋಣ ಎಂದು ಶೆಣೈ ತಿಳಿಸಿದ್ದರು. ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷದ ಜೊತೆ ಸೇರುವುದಿಲ್ಲ. ಎಲ್ಲ ಅಂದು ಕೊಂಡಂತೆ ಆದರೆ ಬಳ್ಳಾರಿಯಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಲ್ಲೇ ನನಗೆ ಹೆಚ್ಚು ಜನರ ಬೆಂಬಲವಿದೆ. ಹಲವು ಪಕ್ಷಗಳ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಜನರ ದನಿಯಾಗುವ ಯಾವ ಪಕ್ಷವು ಇಲ್ಲ ಎಂದು ಹೇಳಿದ್ದರು.