ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಧಾರವಾಡ ಮೂಲದ ಸಯ್ಯದ್ ನಿಹಾಲ್(24) ಮೃತ ದುರ್ದೈವಿ. ಸಯ್ಯದ್ ನಿಹಾಲ್ ಆನೇಕಲ್ ಪಟ್ಟಣದ ಪ್ರತಿಷ್ಠಿತ ಅಲೆಯನ್ಸ್ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ತನ್ನ ಯಮಹಾ ಆರ್ 15 ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೇಕಲ್ ಚಂದಾಪುರ ರಸ್ತೆಯ ಬ್ಯಾಗಡದೇನಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸಯ್ಯದ್ ತಲೆಗೆ ತೀವ್ರ ಪೆಟ್ಟುಬಿದ್ದು ರಕ್ತಸ್ರಾವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆನೇಕಲ್ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪರಿಚಿತ ವಾಹನಕ್ಕಾಗಿ ಶೋಧ ನಡೆಸಿದ್ದಾರೆ.
ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.