ನವದೆಹಲಿ: ಗೋವಾ ಸಿಎಂ ಆಗಿ ಮನೋಹರ್ ಪರಿಕ್ಕರ್ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಬಹುದು, ಆದರೆ ಗುರುವಾರದಂದು ಬಹುಮತ ಸಾಬೀತುಪಡಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಇದರಿಂದ ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದೆ.
ಗೋವಾದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ರಾಜ್ಯಪಾಲರ ಆಹ್ವಾನವನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಖೇಹರ್ ಪೀಠ, ಮೊದಲು ನೀವೇಕೆ ರಾಜ್ಯಪಾಲರನ್ನು ಸರ್ಕಾರ ರಚಿಸಲು ಹಕ್ಕು ಮಂಡಿಸಲಿಲ್ಲ? ಇಂತಹ ಸಂದರ್ಭದಲ್ಲಿ ಒಂದು ಪಕ್ಷಕ್ಕೆ ಮಾತ್ರ ಸಂಖ್ಯಾಬಲ ಇದ್ದಿದ್ದರಿಂದ ಕಾಂಗ್ರೆಸ್ಗೆ ಆಹ್ವಾನ ನೀಡುವ ಪ್ರಶ್ನೆಯೇ ಇಲ್ಲ. ನಿಮಗೆ ಸಂಖ್ಯಾಬಲವಿದ್ದರೆ ಅದನ್ನು ಈಗಲೇ ಸಾಬೀತುಪಡಿಸಿ ಎಂದು ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಸಿಂಗ್ವಿ ಅವರಿಗೆ ನ್ಯಾ. ಪ್ರಶ್ನಿಸಿತು.
ಅಲ್ಲದೆ ಮನೋಹರ್ ಪರಿಕ್ಕರ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಕೋರ್ಟ್ ನಿರಾಕರಿಸಿದ್ದು, ಮಾರ್ಚ್ 16ರಂದು ಬಹುಮತ ಸಾಬೀತುಪಡಿಸುವಂತೆ ಸೂಚನೆ ನೀಡಿತು. ಈ ನಡುವೆ ಇಂದು ಮಧ್ಯಾಹ್ನ 1.30ಕ್ಕೆ ಕಾಂಗ್ರೆಸ್ ನಿಯೋಗ ರಾಜ್ಯಪಾಲ ಮೃದುಲಾ ಸಿನ್ಹಾ ಅವರನ್ನ ಭೇಟಿಯಾಗಲಿದೆ.
ಗೋವಾ ವಿಧಾನಸಭೆಯ ಒಟ್ಟು 40 ಸ್ಥಾನಗಳಲ್ಲಿ ಕಾಂಗ್ರೆಸ್ 17 ಹಾಗೂ ಬಿಜೆಪಿ 13 ಸ್ಥಾನಗಳನ್ನ ಗೆದ್ದಿದವು. ಬಹುಮತಕ್ಕೆ ಬೇಕಾಗಿದ್ದಿದ್ದು 21 ಸ್ಥಾನಗಳು. ಬಿಜೆಪಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರು ಇತರೆ ಪ್ರಾದೇಶಿಕ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳ ಬೆಂಬಲ ಪಡೆದು ಭಾನುವಾರದಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಿತ್ತು.