ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.
ಇಂದಿನಿಂದ ಜೂನ್ 16ರವರೆಗೆ ಮಳೆ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಪ್ರವಾಹ ಸ್ಥಿತಿ ಏರ್ಪಟ್ಟರೆ ಪರಿಸ್ಥಿತಿ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವಂತೆಯೂ ಜಿಲ್ಲಾಡಳಿತ ನಿರ್ದೇಶಿಸಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಮುಂಗಾರು ಚುರುಕುಗೊಂಡಿದ್ದು ಜಿಲ್ಲೆಯಾದ್ಯಾಂತ ಸರಾಸರಿ 84.1 ಮಿ.ಮೀ. ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿಯೇ ಕುಮಟಾದಲ್ಲಿ ಅತಿ ಹೆಚ್ಚು 163.4 ಮಿ.ಮೀಟರ್ ಮಳೆ ದಾಖಲಾಗಿದೆ. ಕುಮಟಾ ತಾಲೂಕಿನ ಮಾದನಗೇರಿಯಲ್ಲಿ ಗುಡ್ಡ ಕುಸಿದಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಜೆಸಿಬಿ ಬಳಸಿ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಯಿತು.