ಮೈಸೂರು: ಸ್ವಾಮಿ ವಿವೇಕಾಂದ ಹಾಗೂ ದೀನ್ ದಯಾಳ್ ಉಪಾಧ್ಯಾಯರ ಬಗ್ಗೆಯಾದರೆ ಅದು ಹಿಂದುತ್ವದ ಭಾಷಣ ಆಗಿರುತ್ತದೆ. ಹಾಗಾಗಿ ಮೋದಿ ಅವರ ಹಿಂದುತ್ವದ ಭಾಷಣವಾದರೆ ಅದನ್ನು ಕೇಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ವಾಮಿ ವಿವೇಕಾನಂದ ಶಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿದ್ದ 125 ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಕಡ್ಡಾಯ ವೀಕ್ಷಣೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮಾತನಾಡಿ, ಇದರ ಬಗ್ಗೆ ಮಾಧ್ಯಮಗಳ ಮೂಲಕ ನನಗೆ ತಿಳಿದಿದೆ. ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ವಿವಿಯವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.
ಮುಂಬರುವ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮೇಯರ್ ಸ್ಥಾನ ಜೆಡಿಎಸ್ಗೆ ಬಿಟ್ಟುಕೊಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಬೇಡಿಕೆ ಇಟ್ಟಿರುವ ವಿಚಾರದಲ್ಲಿ ನಾನು ಯಾರ ಜೊತೆಯೂ ಮಾತನಾಡಿಲ್ಲ. ಈ ಬಗ್ಗೆ ಯಾರೂ ಕೂಡ ನಮ್ಮೊಂದಿಗೆ ಮಾತುಕತೆಗೆ ಮುಂದಾಗಿಲ್ಲ ಎಂದರು.
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ಬಿತ್ತನೆ ಬೀಜ, ರಸ ಗೊಬ್ಬರದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರು ರಸಗೊಬ್ಬರ ಕೇಳಲು ಹೋದಾಗ ಹಾವೇರಿಯಲ್ಲಿ ಗೋಲಿಬಾರ್ ಮಾಡಿದ್ದರು. ಆದರೆ ರಾಜ್ಯದಲ್ಲಿ ಈಗ ಅಂತಹ ಪರಿಸ್ಥಿತಿಯಿಲ್ಲ. ನಮ್ಮ ಸರ್ಕಾರ ರೈತರ ಅಗತ್ಯತೆಗಳನ್ನು ಪೂರೈಸಲು ಬದ್ಧವಾಗಿದೆ ಎಂದು ತಿಳಿಸಿದರು.
ಉತ್ತಮ ಮಳೆಯಾಗುತ್ತಿರುವುದರಿಂದ ನಾಲೆಗಳಿಗೆ ನೀರು ಹರಿಸಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳು 15 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಿದ್ದೇವೆ. ಆ ನೀರಿನಲ್ಲಿ ರೈತರು ಯಾವ ಬೆಳೆ ಬೆಳೆಯಲು ಸಾಧ್ಯವೋ ಅದನ್ನು ಬೆಳೆದುಕೊಳ್ಳಬಹುದು. ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ ಎಂದು ಹೇಳಿದರು.