ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನೂತನ ಶಾಸಕರಾಗಿ ಚುನಾಯಿತರಾದ ಕಳಲೆ ಕೇಶವಮೂರ್ತಿ ಹಾಗೂ ಡಾ. ಗೀತಾ ಮಹದೇವ ಪ್ರಸಾದ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಪೀಕರ್ ಕೆಬಿ ಕೋಳಿವಾಡ ಪ್ರಮಾಣ ವಚನ ಬೋಧನೆ ಮಾಡಿದ್ರು.
ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಕಳಲೆ ಕೇಶವಮೂರ್ತಿ ಅವರು ಶ್ರೀಕಂಠೇಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು. ಹಾಗೆ ಮಲೆ ಮಹದೇಶ್ವರನ ಹೆಸರಿನಲ್ಲಿ ಗೀತಾ ಮಹದೇವಪ್ರಸಾದ್ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
ಇದೇ ವೇಳೆ ಮಾತನಾಡಿದ ಶಾಸಕಿ ಗೀತಾ ಮಹದೇವಪ್ರಸಾದ್, ಸಚಿವ ಸ್ಥಾನ ನೀಡುವ ಬಗ್ಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ. ಅದರ ಬಗ್ಗೆ ನಾನು ಯಾವುದೇ ಯೋಚನೆ ಮಾಡಿಲ್ಲ. ಅವರು ಕೊಟ್ಟರೆ ಮುಂದೆ ನೋಡೋಣ ಅಂದ್ರು.
ಕ್ಷೇತ್ರದಲ್ಲಿ ಮಹದೇವಪ್ರಸಾದ್ ರವರು ಶೇ. 85ರಷ್ಟು ಕೆಲಸ ಮಾಡಿದ್ದಾರೆ. ನಾನು ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಮುಗಿಸಬೇಕಾಗಿದೆ. ಅವರ ನೆನಪು ಇನ್ನೂ ನಮ್ಮನ್ನ ಕಾಡುತ್ತಿದೆ. ಕೆರೆಗೆ ನೀರು ತುಂಬುವ ಯೋಜನೆ ಬಾಕಿಯಿದೆ. ಆ ಕೆಲಸವನ್ನ ಪೂರ್ಣಗೊಳಿಸುವ ಪ್ರಯತ್ನ ಮಾಡುತ್ತೇನೆ. ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಖುಷಿ ತಂದಿದೆ. ನಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಅರ್ಪಿಸುತ್ತೇನೆ ಅಂತ ಗೀತಾ ಮಹದೇವಪ್ರಸಾದ್ ಹೇಳಿದ್ರು .
ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಶಾಸಕನಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ತುಂಬಾ ಸಂತೋಷವಾಗಿದೆ. ಕ್ಷೇತ್ರದ ಮತದಾರರಿಗೆ ನಾನು ಋಣಿಯಾಗಿರುವೆ. ಉಳಿದ ಅಲ್ಪಾವಧಿಯಲ್ಲೇ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತೇನೆ ಅಂದ್ರು.