ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಸಂಧಾನ ಚರ್ಚೆ ನಡೆಸಲು ಸಮಯ ಹಾಗೂ ಸ್ಥಳವನ್ನು ನಿಗದಿ ಮಾಡಿ ತಿಳಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮಹದಾಯಿ ಸಮಸ್ಯೆ ಕುರಿತು ಚರ್ಚೆ ನಡೆಸಲು ಈಗಾಗಲೇ ಗೋವಾ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿಲಾಗಿದ್ದು, ಮಾತುಕತೆ ಮೂಲಕ ಮಹದಾಯಿ ವಿವಾದ ಬಗೆಹರಿಸಿಕೊಳ್ಳುವ ಅಗತ್ಯತೆ ಇದೆ. ನ್ಯಾಯಾಧಿಕರಣದ ವಿಚಾರಣೆಯು 2018 ಫೆಬ್ರವರಿ 06 ರಿಂದ 21 ರ ಒಳಗೆ ನಡೆಯಲಿದ್ದು ಈ ಅವಧಿಗೂ ಮುನ್ನ ವಿವಾದ ಬಗೆಹರಿಸಿಕೊಳ್ಳಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಉತ್ತರ ಕನ್ನಡದ ನೀರಿನ ಸಮಸ್ಯೆ ಬಗೆ ಹರಿಸುವ ಮಹದಾಯಿ ನದಿ ಹಂಚಿಕೆ ವಿವಾದ ಕುರಿತು ಗೋವಾ ಸಿಎಂ ಮನೋಹರ್ ಪರಿಕ್ಕರ್ ಸಂಧಾನ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು. ಈ ಹೇಳಿಕೆ ಉತ್ತರವಾಗಿ ಸಿಎಂ ಸಿದ್ದರಾಮಯ್ಯ ಅವರು ಗೋವಾ ಸರ್ಕಾರಕ್ಕೆ ಮಾತುಕತೆ ನಡೆಸುವಂತೆ ಪತ್ರ ಬರೆದಿದ್ದರು.