ಧಾರವಾಡ: ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ನಡೆದಿದೆ.
ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈತ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ. ಆದರೆ ಈಗ ಜೈಲಿನ ಮುಂಭಾಗ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರಶುರಾಮ್ ಕಳೆದ ಮೂರು ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದನು. ಆದರೆ ಇದ್ದಕ್ಕಿದ್ದಂತೆ ಸೋಮವಾರ ರಾತ್ರಿ ಜೈಲಿನ ಆವರಣದಲ್ಲಿರುವ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಸಂಬಂಧ ಉಪನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.