ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಲ್ಲುಚಪ್ಪಡಿಗಳನ್ನ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಮಂಚನಬಲೆ ಸೇತುವೆ ಬಳಿ ನಡೆದಿದೆ. ಕುರ್ಲಹಳ್ಳಿ ಗ್ರಾಮದ ಅನಿಲ್ ಕುಮಾರ್ (35) ಮೃತ ವ್ಯಕ್ತಿ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತೋರ್ವ ವ್ಯಕ್ತಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದೆ.
ಹೆದ್ದಾರಿಯಲ್ಲಿ ಎದುರಗಡೆಯಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಬಲಗಡೆ ಹೋಗುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಲಾರಿಯ ಹಿಂಬದಿ ಚಪ್ಪಡಿ ಕಲ್ಲುಗಳ ಮೇಲೆ ಕುಳಿತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೊರ್ವರು ಗಾಯಗೊಂಡಿದ್ದಾರೆ.
ಅಪಘಾತವಾದ ನಂತರ ಲಾರಿಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಭುಶಂಕರ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.