ಬೆಂಗಳೂರು: ಅಪ್ಪ ಅಮ್ಮ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಸರ್ಕಾರ ಹಾಗೂ ವೈದ್ಯರ ಹಗ್ಗ ಜಗ್ಗಾಟದಲ್ಲಿ ವೈದ್ಯರ ಮುಷ್ಕರದಿಂದ ಇದೂವರೆಗೂ 7 ಜನ ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರು ವಿಷಾದ ವ್ಯಕ್ತಪಡಿಸುತ್ತಾರೆ ಹೊರತು ಮುಷ್ಕರ ಮಾತ್ರ ಕೈ ಬಿಡುತ್ತಿಲ್ಲ.
ತಮ್ಮ ಬೇಡಿಕೆ ಈಡೇರಿಸುವರೆಗೂ ಮುಷ್ಕರ ಕೈ ಬಿಡಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಹಾಗೇ ಸರ್ಕಾರನೂ ಒಂದು ಗಟ್ಟಿ ನಿರ್ಧಾರಕ್ಕೆ ಬರುತ್ತಿಲ್ಲ. ಮಂಗಳವಾರ ಮಕ್ಕಳು ಸೇರಿ 7 ಜನ ಸಾವನ್ನಪ್ಪಿದ್ದಾರೆ. ಗದಗದಲ್ಲಿ ಚಿಕಿತ್ಸೆ ಸಿಗದೇ ಹೆರಿಗೆಯಾದ ಬಾಣಂತಿಯೊಬ್ಬರು ಮಗು ಎತ್ಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿರುವ ದೃಶ್ಯ ಕಂಡು ಬಂತು. ಹೀಗೆ ಹೇಳುತ್ತಾ ಹೋದರೆ ಊರಿಗೆ ಒಂದು ಸಮಸ್ಯೆ ಸಿಗುತ್ತದೆ.
ಖಾಸಗಿ ವೈದ್ಯರನ್ನ ಕೇಳಿದರೆ ಸರ್ಕಾರ ಫಿಕ್ಸ್ ಮಾಡಿದ ಯೋಜನೆಗಳಲ್ಲಿ ಬಡವರಿಗೆ ಚಿಕಿತ್ಸೆ ಕೊಡ್ತಾ ಇದ್ದೀವಿ. ಹಾಗಂತ ಸರ್ಕಾರ ನಮಗೇನಾದ್ರೂ ಫ್ರಿಯಾಗಿ ನೀರು ಕರಂಟ್ ಕೊಡುತ್ತಿದೆಯಾ, ನಾವು ತೆರಿಗೆ, ಕಮರ್ಶಿಯಲ್ ಚಾರ್ಜ್ ಕಟ್ಟುತ್ತಿದ್ದೇವೆ. ಈಗ ಹೊಸ ಕಾಯ್ದೆ ತಂದು ನಮ್ಮ ಮೇಲೆ ಹೊರೆ ಹಾಕುತ್ತಿದ್ದಾರೆ ಅಂತ ಸರ್ಕಾರವನ್ನೇ ಪ್ರಶ್ನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯ ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?
ಎಲ್ಲಿ ಯಾರು ಮೃತಪಟ್ಟಿದ್ದಾರೆ?
ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 3 ತಿಂಗಳ ಇಬ್ರಾಹಿಂ ಹಾಸನದಲ್ಲಿ ಸಾವನ್ನಪ್ಪಿದ್ದರೆ, ಧಾರವಾಡದಲ್ಲಿ ಡೆಂಗ್ಯೂ ಜ್ವರಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ 12 ವರ್ಷದ ವೈಷ್ಣವಿ ಮೃತಪಟ್ಟಿದ್ದಾಳೆ.
ಬೆಳಗಾವಿಯ ಅಥಣಿಯಲ್ಲಿ 12 ವರ್ಷದ ಕಲ್ಲವ್ವಾ ಅಂಬಿ ಮೃತಪಟ್ಟರೆ, ತುಮಕೂರಿನಲ್ಲಿ 26 ವರ್ಷದ ಜ್ಯೋತಿ ಹೃದಯಾಘಾತಗೊಂಡು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಪಘಾತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ 25 ವರ್ಷದ ಮಹೇಶ್ ವಾಘ್ಮೋರ್ ಸಾವನ್ನಪ್ಪಿದ್ದರೆ, ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ 52 ವರ್ಷದ ಶೇಖಪ್ಪ ಎಂಬುವರು ಹೃದಯಾಘಾತದಿಂದ ಚಿಕಿತ್ಸೆ ಸಿಗದೆ ಮೃತ ಪಟ್ಟಿದ್ದಾರೆ. ಕೊಪ್ಪಳದಲ್ಲಿ ಹೃದಯಾಘಾತದಿಂದ ಚಿಕಿತ್ಸೆ ಸಿಗದೆ 55 ವರ್ಷದ ಗ್ಯಾನಪ್ಪ ಸಾವನ್ನಪ್ಪಿದ್ದಾರೆ.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಎನ್ನುವುದು ದುರದೃಷ್ಟಕರ ಸಂಗತಿ. ಮಸೂದೆ ಮಂಡಿಸಿಯೇ ಸಿದ್ಧ ಎಂದು ಸರ್ಕಾರ ಬಿಗಿಪಟ್ಟು ಹಿಡಿದಿದ್ದರೆ, ಮಸೂದೆ ವಿರೋಧಿಸಿ ವೈದ್ಯರು ಬೀದಿಗೆ ಇಳಿದ ಪರಿಣಾಮ ಅಮಾಯಕರು ಪರಿತಪಿಸುವಂತಾಗಿದೆ.