ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್ನಲ್ಲಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಬ್ಲಾಕ್ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ ಸಿಐಡಿ ಉಲ್ಲೇಖಿಸಿದೆ.
ಏನಿದು ಪ್ರಕರಣ?
ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್ಮೇಲ್ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾದ ಬಳಿಕ ದಿವಾಕರ ಶಾಸ್ತ್ರಿ, ಪ್ರೇಮಲತಾ ಹಾಗೂ ನಾರಾಯಣ ಶಾಸ್ತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನಲ್ಲಿದ್ದ ಆರೋಪಿಗಳಿಗೆ 21 ದಿನಗಳ ಬಳಿಕ ಜಾಮೀನು ಸಿಕ್ಕಿತ್ತು.