ಮಂಡ್ಯ: ಗೋಡೆಗೆ ಕಿಂಡಿ ಕೊರೆದು ಮೊಬೈಲ್ ಶೋ ರೂಂಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಕಳ್ಳರ ಕೃತ್ಯ ಶೋರೂಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮದ್ದೂರು ಪೇಟೆಬೀದಿಯ ಷರೀಫ್ ಎಂಬವರಿಗೆ ಸೇರಿದ ಮಹಾರಾಜ ಮೊಬೈಲ್ ಶೋಂನಲ್ಲಿ ಭಾನುವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಈ ಕಳ್ಳತನ ನಡೆದಿದೆ. ಶೋರೂಂನ ಹಿಂಬದಿ ಗೋಡೆ ಕೊರೆದಿರುವ ಕಳ್ಳರು, ಒಳ್ಳನುಗ್ಗಿ ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ಗಳು, ಬ್ಯಾಟರಿ, ಮೆಮೊರಿ ಕಾರ್ಡ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಸಾರ್ವಜನಿಕರು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮೂವರು ಈ ಕಳ್ಳತನದಲ್ಲಿ ಭಾಗಿಯಾಗಿರುವಂತೆ ತಿಳಿದುಬಂದಿದೆ. ಅಂಗಡಿ ಹೊರಗೆ ಒಬ್ಬ ಮತ್ತು ಒಳಗೆ ಇಬ್ಬರು ಕಳ್ಳರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡುತ್ತಿರುವ ದೃಶ್ಯ ಶೋಂನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಾವಳಿವನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.