ಬಳ್ಳಾರಿ: ಉರುಸಿನ ವೇಳೆ ದರ್ಗಾಕ್ಕೆ ದೇವರ ದರ್ಶನಕ್ಕಾಗಿ ಆಗಮಿಸಿದ ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಳ್ಳಾರಿ ತಾಲೂಕಿನ ರೂಪನಗುಡಿ ಸಮೀಪದ ದರ್ಗಾ ಬಳಿ ನಡೆದಿದೆ.
ರಾಯಚೂರು ಮೂಲದ ಮಹಿಳೆಯೊಬ್ಬರು ದರ್ಗಾ ಉರುಸಿನ ಪ್ರಯುಕ್ತ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಮಹಿಳೆ ಬರ್ಹಿದೆಸೆಗೆ ತೆರಳಿದ್ದಾಗ ನಾಲ್ವರು ಕಾಮುಕರು ಆಕೆಯನ್ನು ಕಿಡ್ನ್ಯಾಪ್ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೂ ಯತ್ನಿಸಿದ್ದಾರೆ. ಅದೃಷ್ಟವಶಾತ್ ಮಹಿಳೆ ಬದುಕುಳಿದಿದ್ದಾರೆ.
ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಘಟನೆಯನ್ನು ಖಂಡಿಸಿ ಸ್ಥಳೀಯರು ಬಳ್ಳಾರಿ ರೂಪನಗುಡಿ ರಸ್ತೆಯನ್ನು ತಡೆದು ರಾತ್ರಿ ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.