ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸರ್ಕಾರದ ಸಾಧನಾ ಸಮಾವೇಶದ ವೇದಿಕೆ ಎದುರಲ್ಲೇ ಮಹಿಳೆಯೊಬ್ಬರು ನ್ಯಾಯಕ್ಕಾಗಿ ಗೋಳಾಟ ನಡೆಸಿ ಕಣ್ಣೀರಿಟ್ಟ ಘಟನೆ ನಡೆದಿದೆ.
ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ನರೇಂದ್ರ ಎಂಬವರ ವಿರುದ್ದ ಸಿಎಂ ಗೆ ದೂರು ನೀಡಲು ಮಹಿಳೆ ಆಗಮಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ಇರುವುವಾಗಲೇ ತಮ್ಮ ಸಂಕಟವನ್ನು ಹೊರ ಹಾಕಿದ ಸಂದರ್ಭದಲ್ಲಿ ಪೊಲೀಸರು ಮಹಿಳೆಯನ್ನು ಬಲವಂತವಾಗಿ ಕರೆದುಕೊಂಡು ಹೊರ ನಡೆದಿದ್ದಾರೆ. ಈ ಎಲ್ಲಾ ಘಟನೆಗೂ ಸಿಎಂ ಸಿದ್ದರಾಮಯ್ಯ ಅವರು ಸಾಕ್ಷಿಯಾದರು, ಆದರೂ ಯಾವುದೇ ಪ್ರತಿಕ್ರಿಯೆ ನೀಡಿದೆ ಸುಮ್ಮನೆ ಕುಳಿತ ದೃಶ್ಯ ಕಂಡು ಬಂತು.
ಮಹಿಳೆಯ ಆರೋಪವೇನು?: ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡ ನರೇಂದ್ರ ಎಂಬವರು ತಮ್ಮ ಜಮೀನನ್ನು ಆಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಆರೋಪ ಮಾಡಿದ ಸಂದರ್ಭದಲ್ಲಿ ನರೇಂದ್ರ ಅವರು ವೇದಿಕೆಯಲ್ಲಿ ಇದ್ದರು. ಈ ಕಾರಣದಿಂದ ಸಿಎಂ ಅವರಿಗೆ ನೇರವಾಗಿ ದೂರು ನೀಡಲು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ಅವರು, ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆದರು. ನನ್ನ ಮೇಲಿನ ರಾಜಕೀಯ ದ್ವೇಷದಿಂದ ಈ ರೀತಿ ಮಾಡಿದ್ದಾರೆ. ಈ ಕುರಿತು ಈಗಾಗಲೇ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ಘಟನೆಯ ನಂತರ ಸಿಎಂ ಸಿದ್ದರಾಮಯ್ಯ ಅವರಿಗೂ ಈ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಘಟನೆ ಸಂಬಂಧ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಸೇವೆ ಸಲ್ಲಿಸಿದ್ದು, ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವರು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
https://www.youtube.com/watch?v=8a_6trj5bmI