– ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು
ನವದೆಹಲಿ: ಬೆಳಗ್ಗಿನ ಜಾವ 3ಕ್ಕೆ ಕರೆ ಮಾಡಿದರೂ ನಿರ್ಲಕ್ಷ್ಯ ಮಾಡದೆ ತಾವೇ ಆಟೋ ಚಲಾಯಿಸಿಕೊಂಡು ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ದ ಮಹಿಳೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಮ್ಮ ಬಿಡುವಿನ ವೇಳೆಯಲ್ಲಿ ಆಟೋ ಚಲಾಯಿಸುವ ಶ್ರೀಮತಿ ರಾಜೀವಿ ಅವರು ಗರ್ಭಿಣಿಯರಿಗೆ ಉಚಿತ ಸವಾರಿಯ ಸೇವೆ ಒದಗಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.
ದೇವರು ಆಕೆಗೆ ಮಂಗಳವನ್ನುಂಟು ಮಾಡಲಿ!
— Vice President of India (@VPSecretariat) July 25, 2020
ಈ ಕುರಿತು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಕರ್ನಾಟಕದ ಉಡುಪಿಯಲ್ಲಿ ಬೆಳಗ್ಗಿನ ಜಾವ 3 ಗಂಟೆಯಲ್ಲಿ ಗರ್ಭಿಣಿ ಮಹಿಳೆಯನ್ನು ತಮ್ಮ ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ಆಶಾ ಕಾರ್ಯಕರ್ತೆ ರಾಜೀವಿ ಅವರ ಉದಾತ್ತ ಕಾರ್ಯವನ್ನು ಶ್ಲಾಘಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ ತಮ್ಮ ಬಿಡುವಿನ ವೇಳೆಯಲ್ಲಿ ಆಟೋ ಚಲಾಯಿಸುವ ರಾಜೀವಿ ಅವರು ಗರ್ಭಿಣಿಯರಿಗೆ ಉಚಿತ ಸವಾರಿಯ ಸೇವೆ ಒದಗಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ದೇವರು ಆಕೆಗೆ ಮಂಗಳವನ್ನುಂಟು ಮಾಡಲಿ ಎಂದಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಆಶಾ ಕಾರ್ಯಕರ್ತೆ, ಮಧ್ಯಾಹ್ನ ನಂತರ ಆಟೋ ಚಾಲಕಿ
ಇಂದು ಬೆಳಗ್ಗಿನ ಜಾವ 3.15ಕ್ಕೆ ಮಹಿಳೆಯೊಬ್ಬರು ರಾಜೀವಿ ಅವರಿಗೆ ಕರೆ ಮಾಡಿ ಹೆರಿಗೆ ನೋವು ಆಸ್ಪತ್ರೆಗೆ ಹೋಗಬೇಕು ಎಂದಿದಾರೆ. ತಕ್ಷಣವೇ ಎಚ್ಚೆತ್ತ ರಾಜೀವಿ ಅವರು, ಮಹಿಳೆಯನ್ನು ಕರೆದುಕೊಂಡು ಉಡುಪಿಯ ಆಸ್ಪತ್ರೆಗೆ ಹೋಗಿದ್ದಾರೆ. ಈ ಮೂಲಕ ಇಬ್ಬರ ಜೀವವನ್ನು ಉಳಿಸಿದ್ದಾರೆ. ಈ ಕುರಿತು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಸ್ವತಃ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.