ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವೇಗವಾಗಿ ಹೆಚ್ಚುತ್ತಿರುವ ಕೊರೊನಾ ಪೀಡಿತರಲ್ಲಿ ಶೇ.82ರಷ್ಟು ಸೋಂಕಿತರಿಗೆ ರೋಗ ಲಕ್ಷಣಗಳೇ ಇಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ಲಕ್ಷಣಗಳು ಕಡಿಮೆ ಇರುವುದರಿಂದ ಹರಡುತ್ತಿರುವ ಸೋಂಕಿನಿಂದ ಅಪಾಯ ಜಾಸ್ತಿ ಇದೆ. ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ವ್ಯಾಪಕವಾಗಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ.82ರಷ್ಟು ಜನರಿಗೆ ಸೋಂಕಿನ ಲಕ್ಷಣಗಳಿಲ್ಲ. ಇಂತಹವರಿಗೆ ಅವರ ಮನೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಇದ್ದು, ಮನೆಯವರು ಒಪ್ಪಿದರೆ, ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಒಂದು ವೇಳೆ ಮನೆಯಲ್ಲಿ ಅಂತಹ ವ್ಯವಸ್ಥೆ ಇರದೆ, ಮನೆಯವರು ಒಪ್ಪದಿದ್ದರೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ರೋಗ ಲಕ್ಷಣಗಳಿದ್ದರೆ ಅಂತಹವರಿಗೆ ಕೊವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾಯ್ ತಿಳಿಸಿದರು.