ದಾವಣಗೆರೆ: ಕೋವಿಡ್ ಕೇರ್ ಸೆಂಟರ್ನಲ್ಲಿರುವ ಕೊರೊನಾ ಸೋಂಕಿತರಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಯೋಗ ಹೇಳಿಕೊಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಎಚ್ ಕಡದಕಟ್ಟೆ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ರೇಣುಕಾಚಾರ್ಯ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟಿದ್ದಾರೆ.
ಇಂದು ಬೆಳಗ್ಗೆ ಕೋವಿಡ್ ಕೇರ್ ಸೆಂಟರ್ಗೆ ಆಗಮಿಸಿದ ಶಾಸಕರು ಸೋಂಕಿತರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನ ಹೇಳಿಕೊಟ್ಟರು. ಯೋಗಾಸನದ ಮೂಲಕ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ರೇಣುಕಾಚಾರ್ಯರವರು ಯೋಗಾಸನದ ವಿವಿಧ ಬಂಗಿಗಳನ್ನು ಸೋಂಕಿತರ ಮುಂದೆ ಮಾಡಿ ತೋರಿಸಿದರು.
ಕಳೆದ ಹಲವು ದಿನಗಳಿಂದ ಸೋಂಕಿತರ ಜೊತೆ ಸೇರಿ ರೇಣುಕಾಚಾರ್ಯ ಒಂದಲ್ಲ ಒಂದು ಕೆಲಸದಲ್ಲಿ ನಿರತರಾಗಿದ್ದಾರೆ. ಮೃತ ಸೋಂಕಿತನ ಶವ ಹೊತ್ತು ಅಂಬುಲೆನ್ಸ್ ಚಾಲನೆ ಮಾಡುತ್ತ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಇದೀಗ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಶಾಸಕ ಎಂಪಿ ರೇಣುಕಾಚಾರ್ಯ ಯೋಗ ಹೇಳಿಕೊಟ್ಟು ಆತ್ಮಸ್ಥೈರ್ಯ ತುಂಬಿದ್ದಾರೆ. ಇದನ್ನು ಓದಿ: ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆ ವಿರುದ್ಧ ಸೋಂಕಿತರ ಆಕ್ರೋಶ