ಚಿಕ್ಕಮಗಳೂರು: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಎರಡು ಬೈಕ್ಗಳ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಯೂನಿಕಾರ್ನ್ ಬೈಕಿನಲ್ಲಿದ್ದ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನ 35 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.
ಬೈಕ್ಗಳು ಡಿಕ್ಕಿಯಾದ ರಭಸಕ್ಕೆ ಮಂಜುನಾಥ್ ಅಪಘಾತದ ಸ್ಥಳದಿಂದ ಸುಮಾರು 20 ಅಡಿ ದೂರಕ್ಕೆ ಹಾರಿ ಬಿದ್ದು ಸಾವನ್ನಪ್ಪಿದ್ದಾನೆ. ಪಲ್ಸರ್ ಬೈಕಿನಲ್ಲಿದ್ದ ಇಬ್ಬರು ಯುವಕರಲ್ಲಿ ಸಂಜಯ್ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸವಾರ ಗೌತಮ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಷ್ಟೆ ಅಲ್ಲದೇ ಡಿಕ್ಕಿಯ ರಭಸಕ್ಕೆ ಎರಡು ಬೈಕ್ಗಳು ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿವೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿಯಲು ಬೈಕ್ ಸವಾರರ ಬಳಿ ಸ್ಯಾನಿಟೈಸರ್ ಇದ್ದು, ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.