ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ ಎದುರಿಸುತ್ತಿದೆ. ಈ ನಡುವೆ ಹೊಸ ಶೈಕ್ಷಣಿಕ ವರ್ಷದ ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದ್ದು, ಈ ಬಾರಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನಿಷ್ ಸಿಸೊಡಿಯಾ ಪ್ರತಿಕ್ರಿಯಿಸಿದ್ದು, ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂದು ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹೇಳಿದ್ದಾರೆ. ಈ ಹಂತದಲ್ಲಿ ಶಾಲೆಗಳನ್ನು ಪುನಾರಂಭಿಸುವುದು ಸರಿಯಲ್ಲ ಎಂದು ಪೋಷಕರ ಅಭಿಪ್ರಾಯಪಟ್ಟಿದ್ದಾರೆ.
ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು ‘ಝೀರೋ ಅಕಾಡೆಮಿಕ್ ಇಯರ್’ ಎಂದು ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಸ್ರೇಲ್ನಲ್ಲಿ ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಕೊರೊನಾ ಸೋಂಕು ಮತ್ತಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು. ಇಸ್ರೇಲ್ ನಲ್ಲಿ ಶಾಲೆ ತೆರೆದು ಆಗಿರುವ ಅನಾಹುತಗಳನ್ನು ಮರೆಯಬಾರದು. ಭಾರತದಲ್ಲಿ ಶಾಲೆಗಳನ್ನು ತೆರೆದರೆ ಏನಾಗಲಿದೆ ಎಂಬುದನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಮತ್ತು ದೆಹಲಿಯ ವಿವಿಧ ಶಾಲೆಗಳಲ್ಲಿನ ಪೋಷಕರ ಸಂಘಗಳು ಆತಂಕ ವ್ಯಕ್ತಪಡಿಸಿವೆ.
ದೆಹಲಿಯಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಬಂದಿದೆ. ಆ ಪೈಕಿ ನಾಲ್ವರು ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಆದರಿಂದ ಸದ್ಯ ಶಾಲೆ ತೆರೆಯುವುದು ಒಳ್ಳೆಯದಲ್ಲ ಎನ್ನುವುದು ದೆಹಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಅಭಿಪ್ರಾಯಪಟ್ಟಿದೆ.