ಕೋಲಾರ: ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಸಾವನ್ನಪ್ಪಿದ್ದ ಘಟನೆ ಕೋಲಾರದಲ್ಲಿ ನಡೆದಿತ್ತು. ಈ ಎಎಸ್ಐಗೆ ಮರಣೋತ್ತರ ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದ್ದು, ಕೋಲಾರದ ಶ್ರೀನಿವಾಸಪುರ ಪೊಲೀಸರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್ಐ 52 ವರ್ಷದ ಮಂಜುನಾಥ್ ಮೃತಪಟ್ಟಿದ್ದರು. ನಿನ್ನೆ ರಾತ್ರಿ ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಸದ್ಯ ಮೃತನಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಪೊಲೀಸ್ ಸಿಬ್ಬಂದಿಯಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಅಂತ್ಯಸಂಸ್ಕಾರಕ್ಕೂ ಮುನ್ನ ಮರಣೋತ್ತರ ಪರೀಕ್ಷೆ ವೇಳೆ ಆತನ ಗಂಟಲು ಮಾದರಿ ಸಂಗ್ರಹ ಮಾಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಎಎಸ್ಐಗೆ ಕೊರೊನಾ ಸೋಂಕು ಇರುವುದನ್ನು ಇಂದು ದೃಢಪಡಿಸಿದ್ದಾರೆ. ಹಾಗಾಗಿ ಮೃತನ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣೆಗೆ ರಾಸಾಯನಿಕ ಸಿಂಪಡಣೆ ಮಾಡಿ ಸೀಲ್ಡೌನ್ ಮಾಡಲಾಗಿದೆ.
ಅಪಘಾತ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೋವಿಡ್ ಗೈಡ್ಲೈನ್ಸ್ ಅನ್ವಯ ಶವ ಸಂಸ್ಕಾರಕ್ಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.