ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರದ ಅಭಿವೃದ್ಧಿಗೆ ಹಲವು ಯೋಜನಗೆಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ಲೋಕೋಪಯೋಗಿ ಇಲಾಖೆ, ಕೇಂದ್ರ ರಸ್ತೆ ನಿಧಿಯಡಿ ನಗರದ ರಸ್ತೆಗಳನ್ನು ಸಿ.ಸಿ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಈ ಮೂಲಕ ಮಾದರಿ ಎನಿಸುವ ರೀತಿಯಲ್ಲಿ ಹುಬ್ಬಳ್ಳಿ, ಧಾರವಾಡ ಅವಳಿ ನಗರದ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶೆಟ್ಟರ್ ಅವರು, ಈಗಾಗಲೇ 24*7 ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಾಗಿದೆ. ಎಲ್ ಆ್ಯಂಡ್ ಟಿ ಕಂಪನಿಯವರು ಸರ್ವೇ ಕಾರ್ಯ ಆರಂಭಿಸಿದ್ದಾರೆ. ಎರಡು ವರ್ಷಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಿ ಇತರೆ ನಗರಗಳಿಗೆ ಮಾದರಿ ಎಸಿಸುವಂತೆ ಹುಬ್ಬಳ್ಳಿ ಧಾರವಾಡ ನಗರವನ್ನು ಅಭಿವೃದ್ಧಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ಮೂಗು ಕಚ್ಚಿದ ಪತಿ
ಹುಬ್ಬಳ್ಳಿ ವಾರ್ಡ್ ನಂಬರ್ 35ರ ವ್ಯಾಪ್ತಿಯ ಕಲ್ಲೂರ್ ಲೇ ಔಟ್ ಬಳಿ ಸಿ.ಎಸ್.ಆರ್ ನಿಧಿಯಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಹಾಗೂ ಮಿತ್ರಾ ವಿಶಾಲ್ ಪಾರ್ಕ್ನ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಸ್ಮಾರ್ಟ್ ಸಿಟಿ ಅಡಿ ಈಗಾಗಲೇ ಹಲವು ಕಡೆ ಸಿ.ಸಿ ರಸ್ತೆ ನಿರ್ಮಿಸಿದ್ದೇವೆ. 40 ಕೋಟಿ ವೆಚ್ಚದಲ್ಲಿ ವಿದ್ಯಾನಗರದಿಂದ ತೋಳಕೆರೆ ವರೆಗೆ ಟೆಂಡರ್ ಶ್ಯೂರ್ ರಸ್ತೆ ನಿರ್ಮಿಸಿದ್ದೇವೆ. ಇದರಿಂದ ಈ ಭಾಗದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ಅದಲ್ಲದೆ ಈ ಭಾಗದ ಭೂಮಿಗೆ ಹೆಚ್ಚಿನ ಬೆಲೆ ದೊರೆತಿದೆ. ಮುಖ್ಯ ರಸ್ತೆಗಳ ಜೊತೆಗೆ ನಗರದ ಎಲ್ಲಾ ಒಳ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಈ ಸಂದರ್ಭದಲ್ಲಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ್ ಕಲಬುರಗಿ, ಮುಖಂಡರುಗಳಾದ ಮಲ್ಲಿಕಾರ್ಜುನ್ ಸಾವಕಾರ, ಸಂತೋಷ್ ಚವ್ಹಾಣ್, ಪಾಲಿಕೆ ಮಾಜಿ ಸದಸ್ಯ ಮಹೇಶ್ ಬುರಲಿ ಸೇರಿದಂತೆ ಮತ್ತಿತರರು ಉಪಸ್ಥಿತಿರಿದ್ದರು.