ನವದೆಹಲಿ: ಕೊರೊನಾ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿನ್ನೆಲೆ ದೇಶದಲ್ಲಿ 15 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಾವನ್ನಪ್ಪುವವರ ಸಂಖ್ಯೆ 4 ಸಾವಿರದ ಗಡಿಯಲ್ಲಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಪಿಪಿಇ ಕಿಟ್ ಧರಿಸಿ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವ ಮೂಲಕ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮಾತನಾಡಿದ ಬಿ.ವಿ ಶ್ರೀನಿವಾಸ್, ಬಿಜೆಪಿ ಅಧಿಕಾರಕ್ಕೆ ಬಂದರೆ 15 ಲಕ್ಷ ನೀಡುವ ಭರವಸೆ ನೀಡಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ 15 ಲಕ್ಷ ಮಂದಿಯಲ್ಲಿ ಸೋಂಕು ಕಂಡು ಬಂದಿದೆ ಎಂದು ವ್ಯಂಗ್ಯ ಮಾಡಿದರು.
ಕೊರೊನಾ ಆರಂಭದಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದರು. ಆದರೆ ಪ್ರಧಾನಿ ಮೋದಿ ಅಹಮದಾಬಾದ್ ನಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡುತ್ತಿದ್ದರು. ಈ ಮೂಲಕ ದುರಂತವನ್ನು ಆಹ್ವಾನಿಸುತ್ತಿದ್ದರು.
ಕೊರೊನಾದಿಂದ ಜನರು ಭೀತಿಗೊಂಡಿದ್ದಾರೆ. ಆದರೆ ಕೇಂದ್ರ ಸಚಿವರು ಭಾಭಿಜೀ ಪಾಪಡ್ ತಿಂದರೆ ಕೊರೊನಾ ನಿಯಂತ್ರಣವಾಗುತ್ತೆ ಎಂದು ಪರಿಸ್ಥಿತಿ ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ. ವಲಸೆ ಕಾರ್ಮಿಕರ ಪರಿಸ್ಥಿತಿ ಸರಿಯಾಗಿ ನಿಭಾಯಿಸಿಲ್ಲ ಮತ್ತು 20 ಲಕ್ಷದ ಪ್ಯಾಕೇಜ್ ನಿಂದ ಯಾರಿಗೂ ಲಾಭವಾಗಿಲ್ಲ ಎಂದು ಆರೋಪಿಸಿದರು.