ಮಂಡ್ಯ: ಅಂಬಿ-ಸುಮಲತಾ ಬಗ್ಗೆ ಮಾತಾಡಿದ್ರೆ ಹುಷಾರ್ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರಿಗೆ ಅಂಬಿ ಅಭಿಮಾನಿಗಳು ಮಂಡ್ಯದಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.
ಸುಮಲತಾ ಅಂಬರೀಶ್ ಹಾಗೂ ಅಂಬರೀಶ್ ಅವರ ವಿರುದ್ಧ ಜೆಡಿಎಸ್ ನಾಯಕರ ವಾಗ್ದಾಳಿ ಹಿನ್ನೆಲೆ ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಂಬರೀಶ್ ಅಭಿಮಾನಿಗಳು ಸಭೆ ನಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಅಂಬರೀಶ್ ಅಭಿಮಾನಿಗಳ ಸಂಘಟನೆಯ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಸಭೆ ಸೇರಿದ ಅಭಿಮಾನಿಗಳು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂಬರೀಶ್ ಅವರು ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಿಲ್ಲ. ಹೀಗಿರುವಾಗ ರವೀಂದ್ರ ಶ್ರೀಕಂಠಯ್ಯ ಅವರು ಅಂಬರೀಶ್ ಕಾಲದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎನ್ನುವುದು ಸರಿಯಲ್ಲ ಎಂದು ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಿಡಿಕಾರಿದರು.
ಸಭೆಯಲ್ಲಿ ಅಂಬರೀಶ್ ಅಭಿಮಾನಿಗಳು ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಅಂಬರೀಶ್ ಅವರ ವಿರುದ್ಧ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸುವುದು. ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆ ವಹಿಸುವಂತೆ ಆಗ್ರಹಿಸಿ ಹೋರಾಟ ನಡೆಸುವುದು. ಶಾಸಕ ರವೀಂದ್ರ ಶ್ರೀಕಂಠಯ್ಯ ಅಂಬರೀಶ್ ಹಾಗೂ ಸುಮಲತಾ ಅವರ ಬಗ್ಗೆ ಮಾತಮಾಡಿದರೆ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಘೇರಾವು ಹಾಕುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.