ಬಳ್ಳಾರಿ: ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ನೂತನ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ.
ವೆಂಕಟೇಶ್(62) ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹೊಸಪೇಟೆ ನಗರದ ಕಾಂಗ್ರೆಸ್ ಮುಖಂಡ ಹಾಗೂ ವಕೀಲ. ಈತನನ್ನು ಬೆಳ್ಳಂಬೆಳಗ್ಗೆ ನಗರದ ನ್ಯಾಯಾಲಯದ ಆವರಣದಲ್ಲೇ ಅಟ್ಟಾಡಿಸಿಕೊಂಡು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಘಟನೆ ಸ್ಥಳೀಯ ನಾಗರಿಕರನ್ನು ಬೆಚ್ಚಿ ಬೀಳಿಸಿದೆ.
ಹೊಸಪೇಟೆಯ ಚಿತ್ತವಾಡ್ಗಿ ನಿವಾಸಿ ತಾರಿಹಳ್ಳಿ ವೆಂಕಟೇಶ್ ಅವರ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಕೌಟುಂಬಿಕ ಕಲಹ, ರಾಜಕೀಯ ದುರುದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ವೃತ್ತಿಯಲ್ಲಿ ನ್ಯಾಯವಾದಿಯಾಗಿರುವ ವೆಂಕಟೇಶ್ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಈ ಹತ್ಯೆಗೆ ಸಂಬಂಧಿಸಿದಂತೆ ಮನೋಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.