– ಬಿಎಸ್ಎನ್ಎಲ್ ಹೇಳಿಕೆ ಕುರಿತು ಕ್ಷಮೆ ಕೇಳಬೇಕು
ಶಿವಮೊಗ್ಗ: ಬಿಎಸ್ಎನ್ಎಲ್ ನ್ನು ಖಾಸಗೀಕರಣಗೊಳಿಸಿ, ಬಿಎಸ್ಎನ್ಎಲ್ನ ಎಲ್ಲ ನೌಕರರನ್ನು ವಜಾಗೊಳಿಸಲಾಗುವುದು ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ, ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಬಿಎಸ್ಎನ್ಎಲ್ ಖಾಸಗೀಕರಣ ಮಾಡುವುದು ಹಾಗೂ ನೌಕರರನ್ನು ಕೆಲಸದಿಂದ ವಜಾ ಮಾಡುವ ಕುರಿತು ಹೇಳಿಕೆ ನೀಡಿದ್ದಾರೆ. ಅಲ್ಲದೆ ನೌಕರರನ್ನು ದೇಶದ್ರೋಹಿಗಳೆಂದು ಕರೆದಿದ್ದಾರೆ. ಹೀಗಾಗಿ ಅನಂತ ಕುಮಾರ್ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು. ಅಲ್ಲದೆ ಸಂಸದರು ನೌಕರರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: BSNL ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಸಂಸದ ಅನಂತಕುಮಾರ್ ಹೆಗಡೆ
85 ಸಾವಿರ ನೌಕರರನ್ನು ಕೆಲಸದಿಂದ ತೆಗೆದು ಹಾಕುವ ಬಗ್ಗೆ ಮತ್ತು ಸಂಸ್ಥೆಯನ್ನು ಖಾಸಗೀಕರಣ ಮಾಡುವ ಬಗ್ಗೆ ಹೇಳಿಕೆ ನೀಡುವ ಮೂಲಕ ಅನಂತ್ ಕುಮಾರ್ ಹೆಗಡೆ ಸಿಬ್ಬಂದಿಗಳಿಗೆ ಬೆದರಿಕೆ ಒಡ್ಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಟೆಲಿಕಾಂ ಸೇವಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಸಂಸ್ಥೆಯ ಸಿಬ್ಬಂದಿಯನ್ನು ದೇಶದ್ರೋಹಿಗಳೆಂದು ಕರೆದಿರುವ ಸಂಸದ ಅನಂತ್ ಕುಮಾರ್ ಇಡೀ ದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಎಸ್ಎನ್ಎಲ್ ಉದ್ಯೋಗಿಗಳ ಕ್ಷಮೆ ಕೋರಬೇಕು. ಜೊತೆಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಚನೆ ಕೈ ಬಿಟ್ಟು, ಸಂಸ್ಥೆ ಮತ್ತು ನೌಕರರನ್ನು ಉಳಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಪದೇ ಪದೇ ಇಂತಹ ಹೇಳಿಕೆ ನೀಡುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಸರ್ಕಾರ ಸಂಸದ ಸ್ಥಾನದಿಂದಲೇ ವಜಾಗೊಳಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.