ಕಲಬುರಗಿ: ಅನ್ಯಾಯ, ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರದ ಕುರಿತು ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಅವರು, ಇದಕ್ಕಾಗಿ ವಿಶೇಷ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು. ಎಲ್ಲಾ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು. ಅನ್ಯಾಯ ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು. ಇದು ಗಂಭೀರ ಮತ್ತು ಸೂಕ್ಷ್ಮವಾದ ವಿಚಾರವಾಗಿದೆ. ಉಳಿದ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಿಎಂ ನೋಡಿಕೊಳ್ಳುತ್ತಾರೆ ಎಂದರು.
ಇದೇ ವೇಳೆ ಮಹಾರಾಷ್ಟ್ರದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾಗಿದೆ. ಈ ಬಗ್ಗೆ ಕಲಬುರಗಿ ಜಿಲ್ಲಾಡಳಿತದೊಂದಿಗೆ ಮಾತನಾಡುತ್ತೇನೆ. ಕಲಬುರಗಿ ಜಿಲ್ಲೆ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದರಿಂದ ಸೂಕ್ಷ್ಮವಾಗಿದೆ. ಇದರ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನ ಸಿದ್ಧಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿಯಾದ ಮಾರ್ಗಸೂಚಿಗಳನ್ನ ತೆಗೆದುಕೊಳ್ಳುತ್ತೇವೆ. ಲಾಕ್ಡೌನ್ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.