ಬೆಂಗಳೂರು: ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಸಂಘರ್ಷ ಅಂತ್ಯವಾದ ಬೆನ್ನಲ್ಲೆ ಆರೋಗ್ಯ ಸಚಿವ ಸುಧಾಕರ್, ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿಹಾಯ್ದಿದ್ದಾರೆ. ಅರಿವಿಲ್ಲದ ವಿಷಯಗಳಲ್ಲಿ ಮೂಗು ತೂರಿಸೋದು ಎಷ್ಟು ಸಮಂಜಸ ಅನ್ನೋ ಪ್ರಶ್ನೆಗೆ ಕೋಡಿಹಳ್ಳಿ ಚಂದ್ರಶೇಖರ್ ಉತ್ತರಿಸಲಿ ಎಂದು ಆರೋಗ್ಯ ಸಚಿವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಸುಧಾಕರ್ ಟ್ವೀಟ್:
ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಸಾರಿಗೆ ವ್ಯವಸ್ಥೆ ಹಾಗೂ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಅರಿವಿದೆಯೇ? ತಮಗೆ ಅರಿವಿಲ್ಲದ ವಿಷಯಗಳ ಬಗ್ಗೆ ಮೂಗು ತೂರಿಸುವುದು ಎಷ್ಟು ಸಮಂಜಸ ಎಂದು ಜನ ಕೇಳುತ್ತಿರುವ ಪ್ರಶ್ನೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮೊದಲು ಉತ್ತರ ನೀಡಬೇಕು.
ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಶ್ರೀ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೇ ಮುಷ್ಕರ, ಬಂದ್ ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟುಮಾಡಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?
ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಭರವಸೆ ನೀಡಿದ್ದಾರೆ. ತಮ್ಮನ್ನು ದಾರಿ ತಪ್ಪಿಸುತ್ತಿರುವವರ ಪ್ರಚೋದನೆಗೆ ಒಳಗಾಗದೆ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.