ಮಡಿಕೇರಿ: ಜಿಲ್ಲಾಸ್ಪತ್ರೆ ಆವರಣದಲ್ಲಿ ಶೀಘ್ರ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯಾಗಲಿದ್ದು, ಸುಮಾರು 1.50 ಕೋಟಿ ರೂ.ಗಳಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಕೊಡಗು, ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕ್ಸಿಜನ್ ಘಟಕ ಸ್ಥಾಪನೆಗೆ ಪೂರಕವಾದ ಕಟ್ಟಡ ನಿರ್ಮಾಣಗೊಳ್ಳಬೇಕಾಗಿದ್ದು, ಯೋಜನೆಯ ಎಲ್ಲ ಜವಾಬ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಈ ಆಕ್ಸಿಜನ್ ಘಟಕವು ಒಂದು ನಿಮಿಷಕ್ಕೆ ಒಂದು ಸಾವಿರ ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮಥ್ರ್ಯ ಹೊಂದಿದೆ ಎಂದು ಸಂಸದರು ವಿವರಿಸಿದರು.
ವಿರಾಜಪೇಟೆಯಲ್ಲಿ ಈಗಾಗಲೇ ಶಾಸಕ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ದಾನಿಗಳ ಸಹಕಾರದಿಂದ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ. ಇದೀಗ ಮಡಿಕೇರಿಯಲ್ಲೂ ಕೇಂದ್ರ ಸರ್ಕಾರದ ನೆರವಿನಿಂದ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಮುಂದೆ ಸೋಮವಾರಪೇಟೆಯಲ್ಲೂ ಘಟಕ ಸ್ಥಾಪನೆಯಾದರೆ ಕೊಡಗಿನ ಆಕ್ಸಿಜನ್ ಬೇಡಿಕೆಯನ್ನು ಇಲ್ಲೇ ಪೂರೈಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದರು.