ಕೋಲಾರ: ಎಲ್ಕೆಜಿ, ಯುಕೆಜಿ ಮಕ್ಕಳ ಆನ್ ಲೈನ್ ಶಿಕ್ಷಣ ಗೀಳಾಗಿದೆ, ಆಡಿಕೊಂಡಿರುವ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಮಾಡುವುದು ನನಗೆ ಅರ್ಥವಾಗದ ವಿಚಾರ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಕೋಲಾರ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಕೆಜಿ, ಯುಕೆಜಿ ಮಕ್ಕಳ ಆನ್ ಲೈನ್ ಶಿಕ್ಷಣ ಗೀಳಾಗಿದೆ, ಆಡಿಕೊಂಡಿರುವ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾಡುವುದು, ನನಗೆ ಅರ್ಥವಾಗದ ವಿಚಾರ. ಅಲ್ಲದೆ ನಿಮ್ಹಾನ್ಸ್ ವೈದ್ಯರ ಪ್ರಕಾರ, ಆರು ವರ್ಷದ ಮಗುವಿನವರೆಗೂ ಆನ್ಲೈನ್ ಶಿಕ್ಷಣ ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದ್ದು, ಮುಂದಿನ ವಾರ ಆನ್ಲೈನ್ ಶಿಕ್ಷಣದ ಬಗ್ಗೆ ಖಚಿತ ಅದೇಶ ಪ್ರಕಟಿಸಲಾಗುವುದು ಎಂದರು.
ಜೂನ್ 25 ರಿಂದ ಜುಲೈ 4 ರವೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ 18 ರಿಂದ 24 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಗುವುದು.
ಪರೀಕ್ಷೆಗಳು ಸುಸೂತ್ರವಾಗಿ ನಡೆಸುವುದಾಗಿ ಹೈಕೋರ್ಟ್ಗೆ ಪ್ರಮಾಣ ಪತ್ರ ನೀಡಿದ್ದು, ಪೋಷಕರ ಆತಂಕ ನಿವಾರಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಹಾಗೂ ಬಸ್ ವ್ಯವಸ್ಥೆ ಮಾಡಲಾಗುವುದು. ಕಂಟೈನ್ಮೆಂಟ್ ಝೋನ್ ಪ್ರದೇಶದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಅವಕಾಶ ನೀಡಲಿದ್ದು, ವಲಸೆ ಬಂದಿರುವ ಕಾರ್ಮಿಕರ ಮಕ್ಕಳಿಗೆ ಅವರಿರುವ ಸ್ಥಳದಲ್ಲೇ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗುವುದು ಎಂದರು.