ಮೈಸೂರು: ಕಬಿನಿ ಜಲಾಶಯದ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಇಂದಿನಿಂದಲೇ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸೋಮವಾರ ಮೈಸೂರಿನಲ್ಲಿ ನಡೆದ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕಬಿನಿ ಜಲಾಶಯ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಇಂದಿನ ನೀರಿನ ಲಭ್ಯತೆ ಮತ್ತು ಹಿಂದಿನ ವರ್ಷಗಳ ಅನುಭವದ ಮೇಲೆ ಈಗ ಈ ವ್ಯಾಪ್ತಿಯ ಎಲ್ಲಾ 52 ಕೆರೆಗಳಿಗೆ ನೀರು ತುಂಬಿಸಲು ಇಂದಿನಿಂದಲೇ ನೀರು ಬಿಡಲಾಗುವುದು ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಸಹ ನಾಲೆಯ ಕೊನೆಯ ಭಾಗಕ್ಕೆ ನೀರು ಕೊಂಡೊಯ್ಯಬೇಕಾಗಿದೆ. ಅದಕ್ಕಾಗಿ ತಕ್ಷಣ ಸಭೆ ಮಾಡುವಂತೆ ಕೇಳಿದ್ದರು. ಕಾಲುವೇ ದುರಸ್ಥಿ, ಹೂಳೆತ್ತುವ ಕೆಲಸವನ್ನು ತ್ವರಿತವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಕೊನೆಯ ಭಾಗದ ಕೆರೆಗೆ ಜುಲೈ ಅಂತ್ಯದ ವರೆಗೆ ನೀರು ತುಂಬಿಸದಿದ್ದರೆ ಪ್ರತಿಭಟನೆಗೆ ಕೂರುವುದಾಗಿ ಶಾಸಕರು ಹೇಳಿದ್ದಾರೆ. ಈ ಅವಧಿಯೊಳಗೆ ನೀರು ತುಂಬಿಸಬೇಕು ಎಂಬ ಬೇಡಿಕೆಗೆ ನನ್ನ ಸಹಮತ ಇದೆ ಎಂದು ಸಚಿವರು ಹೇಳಿದರು. ಇಂದಿನಿಂದ 15 ದಿನಗಳ ವರೆಗೆ ಸುಮಾರು1 ಟಿ.ಎಂ.ಸಿ. ನೀರನ್ನು 52 ಕೆರೆಗಳಿಗೆ ತುಂಬಿಸಲು ನಿರ್ಣಯ ಮಾಡಿದ್ದೇವೆ. ಈಗ 14.5 ಟಿ.ಎಂ.ಸಿ. ನೀರು ಈಗ ಕಬಿನಿಯಲ್ಲಿ ಲಭ್ಯವಿದೆ. ಈ ಪೈಕಿ 5 ಟಿ.ಎಂ.ಸಿ. ನೀರನ್ನು ನೀರಾವರಿ ಉದ್ದೇಶಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.