ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. ಈ ಹಿನ್ನೆಲೆ ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಮಲ್ ಹಾಸನ್ ಇಂದು ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದ್ದಾರೆ.
ಅಸ್ಸಾಂನಲ್ಲಿ ಅಂತಿಮ ಹಂತದ ಮತ್ತು ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದ್ದು, ಜೊತೆಗೆ ಕೇರಳ, ಪುದುಚೇರಿ ಮತದಾರರು ಮತಚಲಾಯಿಸುತ್ತಿದ್ದಾರೆ.
ಅಸ್ಸಾಂನ ಅಂತಿಮ ಹಂತದಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಆಡಳಿತ ಸರ್ಕಾರ ಬಿಜೆಪಿ ಎರಡನೇ ಭಾರೀ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ 31 ಸ್ಥಾನಗಳಿಗಾಗಿ ಮೂರನೇ ಹಂತದ ಚುನಾವಣೆ ನಡೆಯುತ್ತಿದೆ. ಕೇರಳದಲ್ಲಿ 140 ಸ್ಥಾನಕ್ಕಾಗಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಆಡಳಿತ ಸರ್ಕಾರ ಎಲ್ಡಿಎಫ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಸರ್ಕಾರ ಉಳಿಸಿಕೊಳ್ಳಲು ಸರ್ಕಸ್ ನಡೆಸುತ್ತಿದೆ.
ವಿ ನಾರಾಯಣಸ್ವಾಮಿ ನೇತೃತ್ವದಲ್ಲಿದ್ದ ಪುದುಚೇರಿ ಕಾಂಗ್ರೆಸ್ ಸರ್ಕಾರದ ನಾಟಕೀಯ ಕುಸಿತದಿಂದ, ಪ್ರಸ್ತುತ ರಾಷ್ಟ್ರಪತಿ ಆಡಳಿತದಲ್ಲಿದೆ. ಕಾಂಗ್ರೆಸ್ ಪಕ್ಷವು 30 ಸ್ಥಾನಗಳಲ್ಲಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಡಿಎಂಕೆ 13 ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಎಐಎಡಿಎಂಕೆ ಮತ್ತು ಡಿಎಂಕೆ ಆಡಳಿತ ನಡೆಸುತ್ತಿರುವ ತಮಿಳುನಾಡಿನಲ್ಲಿ ಒಟ್ಟು 234 ಸ್ಥಾನಗಳಿಗೆ ಇಂದು ಒಂದೇ ದಿನ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.
ಸದ್ಯ ಕೋವಿಡ್-19 ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವ ಮೂಲಕ ಮತದಾನ ನಡೆಸಲಾಗುತ್ತಿದೆ. ಅಲ್ಲದೆ ಚುನಾವಣಾ ಆಯೋಗವು ಸೂಕ್ಷ್ಮ ಪ್ರದೇಶಗಳಲ್ಲಿ ಸಿಆರ್ಪಿಸಿಯು ಸೆಕ್ಷನ್ 144ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ಜಾರಿಗೊಳಿಸಿದೆ. ಜೊತೆಗೆ ಶಾಂತಿಯುತವಾಗಿ ಮತದಾನ ನಡೆಸಲು ಎಲ್ಲಾ ರೀತಿಯ ಬಿಗಿ ಭದ್ರತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.