ಮಂಗಳೂರು: ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡುತ್ತಿದೆ. ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದರು.
ರಾಮಮಂದಿರ ತೀರ್ಪಿನಲ್ಲೂ ಬಾಬ್ರಿ ಧ್ವಂಸಗೊಳಿಸಿದ್ದು ಅಪರಾಧ ಅಂತ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಕೋರ್ಟಿನ ಇಂದಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋವಷ್ಟರ ಮಟ್ಟಿಗೆ ನಾಚಿಕೆಗೇಡು ಉಂಟುಮಾಡಿದೆ. 28 ವರ್ಷ ಕಾದರೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಅಂತಾದ್ರೆ ನ್ಯಾಯ ಎಲ್ಲಿದೆ. ಬಿಜೆಪಿ ಮತ್ತು ಸಂಘ ಪರಿವಾರ ಪ್ರಭುತ್ವ ಬೀರಿ ದೇಶ ಒಡೆಯಲು ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ
28 ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯ ಅಂತಿಮ ತೀರ್ಪಿನಲ್ಲಿ ಇದು ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು 2,300 ಸಾವಿರ ಪುಟಗಳು ಇರುವ ತೀರ್ಪನ್ನು ಬರೆದಿದ್ದಾರೆ. ಈ ತೀರ್ಪಿನಿಂದಾಗಿ ಎಲ್ಕೆ ಅಡ್ವಾಣಿ ಅವರಿಗಿದ್ದ ಎಲ್ಲ ಕಂಟಕ ಈಗ ದೂರವಾಗಿದೆ. ಇದನ್ನೂ ಓದಿ: ಬಿಜೆಪಿ ಭೀಷ್ಮನಿಗೆ ಬಿಗ್ ರಿಲೀಫ್ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್ ಹೇಳಿದ್ದು ಏನು?
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ, ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು. ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295, 149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು. ಇದನ್ನೂ ಓದಿ: ತೀರ್ಪು ಬಹಳ ಸಂತಸ ತಂದಿದೆ – ಅಡ್ವಾಣಿ