-ಶವಕ್ಕಾಗಿ ಹುಡುಕಾಟ
ದಾವಣಗೆರೆ: ಈಜಲು ಹೋದ ಯುವಕ ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಮಲೇಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.
21 ವರ್ಷದ ವೆಂಕಟೇಶ್ ನೀರು ಪಾಲಾದ ಯುವಕ. ಭಾನುವಾರ ವೆಂಕಟೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದನು. ಕೆರೆ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ವೆಂಕಟೇಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕದ ದಳದ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಭಾನುವಾರ ರಾತ್ರಿ 10 ಗಂಟೆಯವರೆಗು ಶವಕ್ಕಾಗಿ ಹುಡುಕಾಟ ನಡೆಸಿದ್ದರು.
ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳದಲ್ಲಿ ವೆಂಕಟೇಶ್ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.