ಉಡುಪಿಯಲ್ಲಿ ಭಾರೀ ಮಳೆ- ಮನೆಗಳಿಗೆ ನುಗ್ಗಿದ ಇಂದ್ರಾಣಿ ನದಿ ನೀರು

Public TV
1 Min Read
udp rain 2

ಉಡುಪಿ: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ವಿಸ್ತರಣೆ ಮಾಡಿದೆ. ಇಂದು ವಿಪರೀತ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

udp rain 1

ಉಡುಪಿ ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಬೈಲಕೆರೆ, ಕಲ್ಸಂಕ, ಬನ್ನಂಜೆ, ನಿಟ್ಟೂರು ವ್ಯಾಪ್ತಿಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ನಗರದ ಒಳಗೆ ಹಾದು ಹೋಗುವ ಇಂದ್ರಾಣಿ ನದಿ ಮೈತುಂಬಿ ಹರಿಯುತ್ತಿದ್ದು, ಸುತ್ತಮುತ್ತಲ ಮನೆಗಳಿಗೆ ನೀರು ನುಗ್ಗಿದೆ.

ಸ್ಥಳೀಯ ನಿವಾಸಿ, ಬೇಬಿ ಪುತ್ರನ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಪ್ರತಿ ವರ್ಷ ಮಳೆಗಾಲದಲ್ಲಿ ನದಿ ನೀರು ಮನೆಗೆ ನುಗ್ಗುತ್ತದೆ. ಸುಮಾರು ಒಂದು ವಾರಗಳ ಕಾಲ ನೆರೆ ಇರುತ್ತದೆ. ಈ ಬಗ್ಗೆ ನಗರಸಭೆಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಲುವೆಯ ಹೂಳನ್ನು ಎತ್ತಬೇಕು, ಅಡ್ಡಲಾಗಿ ಕಟ್ಟಿದ ತಡೆಗೋಡೆಯನ್ನು ಇನ್ನೂ ಮೇಲಕ್ಕೆ ಏರಿಸಬೇಕು ಎಂದು ಒತ್ತಾಯಿಸಿದ್ದಾರೆ.

udp rain 2

ರಾಷ್ಟ್ರೀಯ ಹೆದ್ದಾರಿ 66ರ ಆಸುಪಾಸಿನಲ್ಲಿ ಕೂಡ ಕೃತಕ ನೆರೆ ಸೃಷ್ಟಿಯಾಗಿದೆ. ರಸ್ತೆ ಕಾಮಗಾರಿ ಒಳಚರಂಡಿ ಸೇತುವೆ ಕಾಮಗಾರಿ ಬಾಕಿ ಇರುವಲ್ಲಿ ಸುತ್ತಮುತ್ತಲ ಗದ್ದೆಗಳಿಗೆ, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಮುದ್ರ ಮತ್ತು ನದಿ ಪಾತ್ರದ ಜನ ಜಾಗರೂಕರಾಗಿರಬೇಕು ಎಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *