ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನದಿ ಮಾಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಎರಡು ಕ್ಷೇತ್ರಗಳ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ತಲೆನೋವು ಇಲ್ಲ. ಆದರೆ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಆರ್.ಆರ್ ನಗರದಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ಖಚಿತವಾಗಿದೆ. ಆದರೆ ಕಾಂಗ್ರೆಸ್, ಜೆಡಿಎಸ್ ನಲ್ಲಿ ಪ್ರಬಲ ಅಭ್ಯರ್ಥಿ ತಲಾಶ್ ನಡೆಸಲಾಗುತ್ತಿದೆ. ಇನ್ನು ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ತಲೆ ನೋವಿಲ್ಲ. ಕಳೆದ ಉಪಚುನಾವಣೆಯ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆಶ್ವಾಸನೆ ನೀಡಿದ್ದರು. ಹೀಗಾಗಿ ಮುನಿರತ್ನ ಅವರಿಗೆ ಆರ್.ಆರ್.ನಗರ. ಕ್ಷೇತ್ರದ ಟಿಕೆಟ್ ಸಿಗುವುದು ಪಕ್ಕಾ ಆಗಿದೆ.
ಶಿರಾದಲ್ಲಿ ಯಾರು?
ಮಾಜಿ ಶಾಸಕ ಟಿ.ಬಿ.ಜಯಚಂದ್ರಗೆ ಕಾಂಗ್ರೆಸ್ಸಿನಿಂದ ಟಿಕೆಟ್ ನೀಡಲಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಮಾತ್ರ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಒಕ್ಕಲಿಗ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ. ಕಾಂಗ್ರೆಸ್ ಮಾಜಿ ಸಂಸದ ಮೂಡ್ಲಗಿರಿಯಪ್ಪನ ಮಗ ರಾಜೇಶ್ ಗೌಡ, ಮಾಜಿ ಶಾಸಕ ಸುರೇಶ್ ಗೌಡ ಹೆಸರುಗಳು ಮುನ್ನೆಲೆಗೆ ಬಂದಿವೆ. ಸದ್ಯ ರಾಜೇಶ್ ಗೌಡ ಜೆಡಿಎಸ್ ನಿಂದಲೂ ಟಿಕೆಟ್ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ಜೆಡಿಎಸ್ ಸತ್ಯನಾರಯಣ್ ಕುಟುಂಬಕ್ಕೆ ಟಿಕೆಟ್ ನೀಡಿದರೆ ಆಗ ರಾಜೇಶ್ ಗೌಡರಿಗೆ ಬಿಜೆಪಿಯಿಂದ ಟಿಕೆಟ್ ನೀಡಲು ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪಚುನಾವಣೆಗೆ ಅಕ್ಟೋಬರ್ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುತ್ತದೆ. ಅಕ್ಟೋಬರ್ 17ಕ್ಕೆ ನಾಮಪತ್ರಗಳ ಪರಿಶೀಲನೆ ಇದ್ದು, ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ ಎಂಬುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಗರಿಗೆದರಿದೆ.