ಬೆಂಗಳೂರು: ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಭಾನುವಾರ ಮಲ್ಲೇಶ್ವರದ ಎಂಎಲ್ಎ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ಲಸಿಕೆ ಶಿಬಿರಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಖಾಸಗಿ ಸಂಸ್ಥೆಗಳ ಜತೆ ಸೇರಿ ಭಾನುವಾರ 1900 ಮಂದಿಗೆ ಲಸಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಡಿಸಿಎಂ ಅವರ ಸೇವಾ ಕಾರ್ಯಕ್ಕೆ ಸ್ವಾಮೀಜಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಈಗಾಗಲೇ ಈ ಭಾಗದಲ್ಲಿ ಬಹಳಷ್ಟು ಜನ ಲಸಿಕೆ ಪಡೆದಾಗಿದೆ. ಡಿಸಿಎಂ ಅತ್ಯುತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಡಿಸಿಎಂ, ಮಲ್ಲೇಶ್ವರ ವಿಧಾಸಭೆ ಕ್ಷೇತ್ರದಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಈಗಾಗಲೇ ಹಲವಾರು ಕಡೆ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಸಲಾಗಿದೆ. ಬಿಪಿಎಲ್ ಕಾರ್ಡ್ ದಾರರು, ಅದರಲ್ಲಿ ಮುಖ್ಯವಾಗಿ ಬೀದಿ ವ್ಯಾಪಾರಿಗಳು, ಆಟೋ ಚಾಲಕರು, ಸೆಕ್ಯೂರಿಟಿ ಗಾರ್ಡ್ ಗಳು ಸೇರಿದಂತೆ ದೈಹಿಕ ಅಶಕ್ತರಿಗೆ ಲಸಿಕೆ ನೀಡಲಾಗುತ್ತಿದೆ. ಅದರ ಮುಂದುವರಿದ ಭಾಗ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಆಕ್ಟ್ ಫೈಬರ್ ನೆಟ್ ಕಂಪನಿಯ ಸಿಇಒ ಸುನೀಲ್, ಸ್ಥಳೀಯ ಬಿಜೆಪಿ ಮುಖಂಡರು, ಪಾಲಿಕೆ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಒಲಿಂಪಿಕ್ಸ್ ಗೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರಿಗೆ ಜೂ.22ರಿಂದ ಲಸಿಕೆ: ಡಿಸಿಎಂ