ಮಂಡ್ಯ: ಕೊರೊನಾ ನಿಯಂತ್ರಣ ಮಾಡೋದಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದೆ. ಆದರೆ ಜಿಲ್ಲೆಯಲ್ಲೊಂದು ಕಳ್ಳರ ಗ್ಯಾಂಗ್ ಲಾಕ್ಡೌನ್ ಅನ್ನೇ ಬಂಡವಾಳ ಮಾಡಿಕೊಂಡು ಎಟಿಎಂ ಯಂತ್ರದಲ್ಲಿದ್ದ ಬರೋಬರಿ 17.50 ಲಕ್ಷ ರೂ. ಹಣವನ್ನು ಕಳವು ಮಾಡಿದೆ.
ಮದ್ದೂರಿನ ಸರ್ಕಲ್ನಲ್ಲಿ ಎಸ್.ಬಿ.ಐ ಎಟಿಎಂ ಕೇಂದ್ರದ ಮುಂಭಾಗ ಇದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಗ್ಯಾಸ್ ಕಟ್ಟರ್ ನಿಂದ ಸುಟ್ಟು, ಬಳಿಕ ಒಳ ನುಗ್ಗಿ ಎಟಿಎಂ ಯಂತ್ರವನ್ನು ಗ್ಯಾಸ್ ಕಟ್ಟರ್ ನಿಂದ ತುಂಡರಿಸಿ 17.50 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಅಶ್ಚಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ ಪ್ರಸಾದ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.