– ಎಪಿಎಂಸಿಯಿಂದ ಮಧ್ಯವರ್ತಿಗಳಿಗೆ ಮಾತ್ರ ಲಾಭ
– ಕಾಂಗ್ರೆಸ್ ಕುಮ್ಮಕ್ಕಿನಿಂದ ಪ್ರತಿಭಟನೆ
ಹುಬ್ಬಳ್ಳಿ: ಎಪಿಎಂಸಿಯಿಂದ ರೈತರಿಗೆ ಲಾಭವಾಗಿಲ್ಲ. ಎಪಿಎಂಸಿ ಇಲ್ಲ ಅಂದ್ರೆ ಇಲ್ಲ, ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ ಸಿಗಲಿದೆ. ಆದರೆ ಕಾಂಗ್ರೆಸ್ನವರ ಕುಮ್ಮಕ್ಕಿನಿಂದ ಈಗ ಪ್ರತಿಭಟನೆ ನಡೆಯುತ್ತಿದೆ ಎಂದು ನಾಳೆ ನಡೆಯಲಿರುವ ರೈತರ ಪ್ರತಿಭಟನೆ ವಿರುದ್ಧ ಶೆಟ್ಟರ್ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಕುಮ್ಮಕ್ಕಿನಿಂದ ಪ್ರತಿಭಟನೆ ನಡೆಯುತ್ತಿದೆ. ನಿಜವಾದ ರೈತರು ಅದರಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದ ಕಾರಣ, ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜಕೀಯ ಪ್ರೇರಿತ ಪ್ರತಿಭಟನೆಗೆ ರೈತರು ಬೆಂಬಲ ನೀಡಬಾರದೆಂದು ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿಯವರದ್ದು ರೈತ ಪರವಾದ ಸರ್ಕಾರವಾಗಿದೆ. ಮೋದಿಯವರ ವರ್ಚಸ್ಸಿಗೆ ಕುಂದು ತರುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ನಿಜವಾದ ರೈತರು ನಾಳೆಯ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.