ನೆಲಮಂಗಲ: ಒಂದು ವಾರದಲ್ಲಿ ಇಬ್ಬರು ಮಾನವರನ್ನು ತಿಂದು ಮುಗಿಸಿದ ನರಭಕ್ಷಕ ಚಿರತೆಗಳ ಹಾವಳಿ ನೆಲಮಂಗಲದ ಹೊರವಲಯದಲ್ಲಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 11 ಬೋನ್ ಇಟ್ಟಿದ್ದರು. ಇಂದು ಬೆಳ್ಳಂಬೆಳಗ್ಗೆ ಎರಡು ಚಿರತೆ ಮತ್ತು ಮರಿಗಳು ಬೋನಿಗೆ ಬಿದ್ದಿವೆ.
ತಡರಾತ್ರಿ ಎರಡು ಮರಿ ಹಾಗೂ ಇಂದು ಬೆಳಗ್ಗೆ ಎರಡು ಚಿರತೆ ಬೋನಿಗೆ ಬಿದ್ದಿರುವ ಮಾಹಿತಿಯನ್ನು ಮಾಗಡಿ ಅರಣ್ಯಾಧಿಕಾರಿಗಳು ನೀಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೋಲೂರು ಮತ್ತು ಮಾಗಡಿ ತಾಲೂಕಿನ ಗಡಿ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿವೆ.
ಒಂದು ಚಿರತೆ ಬೋಡಗನಪಾಳ್ಯ ಹಾಗೂ ಮತ್ತೊಂದು ಚಿರತೆ ಶಿರಗನಹಳ್ಳಿಯಲ್ಲಿ ಬೋನಿಗೆ ಬಿದ್ದಿದೆ. ಚಿರತೆ ಮರಿ ದಾಸೇಗೌಡನ ಪಾಳ್ಯದಲ್ಲಿ ಪ್ರತ್ಯೇಕವಾಗಿ ಕಂಡಿದೆ. ಒಂದೇ ವಾರದಲ್ಲಿ ಮೂರು ವರ್ಷದ ಮಗು, 68 ವರ್ಷದ ವೃದ್ಧೆಯನ್ನು ಬಲಿಪಡೆದ ಚಿರತೆಗಳ ಚಲನ ವಲನದ ಮೇಲೆ ಅರಣ್ಯಧಿಕಾರಿಗಳು ಕಣ್ಣಿಟ್ಟಿದ್ದರು. ದೊಡ್ಡ ಚಿರತೆ ಹಿಡಿಯಲು ಮರಿ ಚಿರತೆ ಬಳಸಿಕೊಂಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಇದೀಗ ಮಾಗಡಿ ವಲಯ ಅರಣ್ಯಾಧಿಕಾರಿಗಳ ಕಾರ್ಯಚರಣೆಗೆ ಅಲ್ಪ ಯಶಸ್ಸು ಸಿಕ್ಕಿದೆ. ಸೆರೆಯಾಗಿರುವ ಚಿರತೆ ನಿನ್ನೆ ವೃದ್ಧೆಯನ್ನು ಬಲಿ ಪಡೆದ ಚಿರತೆಯೋ ಅಥವಾ ಬೇರೆ ಚಿರತೆಯೋ ಎಂಬ ಗೊಂದಲದಲ್ಲಿ ಗ್ರಾಮಸ್ಥರು ಇದ್ದಾರೆ. ಚಿರತೆಯನ್ನು ನೋಡಲು ನೂರಾರು ಜನ ಸ್ಥಳದಲ್ಲಿ ಜಮಾಯಿಸಿದ್ದರು. ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆ ಆತಂಕ ವ್ಯಕ್ತವಾಗಿದೆ.