ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.
ಎಸ್ಪಿಬಿ ಆರೋಗ್ಯ ಸ್ಥಿತಿಗತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಂಜಿಎಂ ಹೆಲ್ತ್ ಕೇರ್, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡದ ಅವರ ಆರೈಕೆ ಮಾಡುತ್ತಿದೆ. ಅವರ ಸಲಹೆ ಮೇರೆಗೆ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಈಗಲೂ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಅವರ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ. ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.
ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ವಿಡಿಯೋ ಬಿಡುಗಡೆ ಮಾಡಿದ್ದ ಎಸ್ಪಿಬಿ ಕಳೆದ ಎರಡು– ಮೂರು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶೀತ ಮತ್ತು ಜ್ವರ ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಬಳಿಗೆ ಚಿಕಿತ್ಸೆ ಪಡೆಯಲು ಮುಂದಾದೆ. ಪರೀಕ್ಷೆಯ ಬಳಿಕ ಕೊರೊನಾ ಸೋಂಕು ಸಣ್ಣ ಪ್ರಮಾಣದಲ್ಲಿರುವುದು ಗೊತ್ತಾಯಿತು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದರು. ಆದರೆ ಕುಟುಂಬದ ಸದಸ್ಯರು ಒಪ್ಪದ ಕಾರಣ ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯದ ಬಗ್ಗೆ ಯಾರೊಬ್ಬರು ಚಿಂತಿಸಬೇಕಿಲ್ಲ. ನನ್ನ ಆರೋಗ್ಯ ವಿಚಾರಿಸಲು ಮೊಬೈಲ್ ಕಾಲ್ ಮಾಡಬೇಡಿ. ಕಾಲ್ ಸ್ವೀಕರಿಸುವ ಸ್ಥಿತಿಯಲ್ಲಿ ನಾನಿಲ್ಲ. ಶೀತದ ಹೊರತಾಗಿ ನಾನು ಚೆನ್ನಾಗಿದ್ದೇನೆ. ಜ್ವರವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗುತ್ತೇನೆ ಎಂದು ಹೇಳಿದ್ದರು.
ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು.