ಬೆಂಗಳೂರು: ಐ ಮಾನಿಟರಿ ಅಡ್ವೈಸರಿ(ಐಎಂಎ) ಸಮೂಹ ಕಂಪನಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಕೋರ್ಟ್ 3 ದಿನ ಸಿಬಿಐ ಕಸ್ಟಡಿಗೆ ನೀಡಿದೆ.
ನ.22ರಂದು ಸಿಬಿಐ ಅಧಿಕಾರಿಗಳು ಮನೆಗೆ ಹೋಗಿ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ಗಂಗಾನಗರದ ಕಚೇರಿಗೆ ವಿಚಾರಣೆಗೆ ಕರೆ ತಂದಿದ್ದರು. ಅರೆಸ್ಟ್ ಬಳಿಕ ಕೋರ್ಟ್ ಬೇಗ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು.
ಪರಪ್ಪನ ಅಗ್ರಹಾರ ಸೇರಿದ್ದ ಬೇಗ್ರನ್ನು ಈ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕು ಎಂದು ಇಂದು ಸಿಬಿಐ ಕೋರ್ಟ್ಗೆ ಮನವಿ ಮಾಡಿತ್ತು. ವಾದವನ್ನು ಪುರಸ್ಕರಿಸಿದ ಕೋರ್ಟ್ ಮೂರು ದಿನ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಬೇಗ್ ಬಿಜೆಪಿ ಸೇರ್ಪಡೆಗೆ ಕೊಕ್ಕೆ ಹಾಕಿದ್ದ ಹೈಕಮಾಂಡ್
ಬಂಧನ ಯಾಕೆ?
ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್ ನೀಡಿ ರೋಷನ್ ಬೇಗ್ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.
ಈ ನಡುವೆ ಮನ್ಸೂರ್ ಖಾನ್ ನಾನು ರೋಷನ್ ಬೇಗ್ ಅವರಿಗೆ ಹಣ ನೀಡಿದ್ದೇನೆ. ಈ ಹಣವನ್ನು ರೋಷನ್ ಬೇಗ್ ಅವರಿಂದ ಪಡೆಯಲೇಬೇಕು ಎಂದು ಹೇಳಿದ್ದಾನೆ. ಒಂದು ವೇಳೆ ಹಣವನ್ನು ಪಡೆಯದೇ ಇದ್ದರೆ ನಿಮ್ಮ ವಿರುದ್ಧವೇ ನ್ಯಾಯಾಧೀಶರಿಗೆ ದೂರು ನೀಡುತ್ತೇನೆ ಎಂದು ಮನ್ಸೂರ್ ಖಾನ್ ಸಿಬಿಐ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.