ಚಿಕ್ಕೋಡಿ: ಒಂದೂವರೆ ವರ್ಷದ ಗಂಡು ಮಗುವಿನೊಂದಿಗೆ ಬಾವಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಂಗಟೋಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಂಗಟೋಳ್ಳಿ ಗ್ರಾಮದ ಶಕುಂತಲಾ ಬ್ಯಾಳಿ (31) ಹಾಗೂ ಪುತ್ರ ಭುವನ್ ಮೃತ ದುರ್ದೈವಿಗಳು. ಗ್ರಾಮದ ಮನೆಯ ಪಕ್ಕದಲ್ಲಿರುವ ಬಾವಿಗೆ ತನ್ನ ಪುಟ್ಟ ಕಂದನೊಂದಿಗೆ ಗೃಹಿಣಿ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕೋಡಿ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಪೊಲೀಸ್ರು ಶವ ಹೊರ ತೆಗೆದಿದ್ದಾರೆ.
ಕುಟುಂಬದವರ ಜೊತೆ ಅನ್ಯೋನ್ಯವಾಗಿದ್ದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಅತ್ಮಹತ್ಯೆ ಮಾಡಿಕೊಂಡ ಮಹಿಳೆ ರಾಯಭಾಗ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಪತಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಾರೆ ಎಂದು ತಿಳಿದು ಬಂದಿದೆ. ಪುಟ್ಟ ಬಾಲಕನ ಜೊತೆ ತಾಯಿ ಪ್ರಾಣ ಬಿಟ್ಟಿರುವುದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.