ಕಲಬುರಗಿ: ಹಣ್ಣಿನ ವ್ಯಾಪಾರಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಅಬ್ದುಲ್ ಖದೀರ್(32) ಆತ್ಮಹತ್ಯೆ ಮಾಡಿಕೊಂಡ ಹಣ್ಣಿನ ವ್ಯಾಪಾರಿ. ಈ ಘಟನೆ ಕಲಬುರಗಿಯ ಕಂಟೈನ್ಮೆಂಟ್ ಝೋನ್ ಮೋಮಿನಪುರ ಬಡಾವಣೆಯಲ್ಲಿ ನಡೆದಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಬ್ದುಲ್ ನನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೊಮ್ಮಿನಪುರ ಬಡಾವಣೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿತ್ತು. ಇತ್ತ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಣ್ಣಿನ ವ್ಯಾಪಾರ ಮಾಡಲಾಗದೆ ವ್ಯಾಪಾರಿ ಕಂಗಾಲಾಗಿದ್ದನು. ಹೀಗಾಗಿ ತನ್ನ ವ್ಯಾಪಾರಕ್ಕೆ ತೀವ್ರ ಹೊಡೆತ ಬಿದ್ದಿದ್ದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.