ಬೆಂಗಳೂರು: ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ 5 ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಆರೋಪ ಮಾಡಿತ್ತು. ಈ ಆರೋಪವನ್ನು ಸಿಎಂ ಪುತ್ರ ತಳ್ಳಿ ಹಾಕಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ 5 ಸಾವಿಕ ಕೋಟಿ ಸಂಗ್ರಹ ಮಾಡಿದ್ದಾರೆ ಎಂದು ಆರೋಪಿಸಿ ಪತ್ರವನ್ನು ಬಿಡುಗಡೆ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ವಿಜಯೇಂದ್ರ, ಕಥೆ ಕಟ್ಟುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ ಎಂದಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ , ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ,ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು.
— Vijayendra Yeddyurappa (@BYVijayendra) August 26, 2020
ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ, ಕಟ್ಟು ಕಥೆ ಕಟ್ಟುವುದರಲ್ಲಿ, ಹಸಿ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಟೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದು ಕಿಡಿಕಾರಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ. ಈ ಕುರಿತು ಬಿಜೆಪಿ ಪಕ್ಷದ ಶಾಸಕರು ಹೈಕಮಾಂಡ್ಗೆ ಬರೆದಿದ್ದಾರೆ. ಪತ್ರದಲ್ಲಿ ಬಿಜೆಪಿ ಶಾಸಕರೇ ಆರೋಪ ಮಾಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದರು.
ವಿಜಯೇಂದ್ರ ಅವರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ಆಡಿಯೋ ಮತ್ತು ವಿಡಿಯೋ ಕ್ಲೀಪಿಂಗ್ಗಳನ್ನು ನಾವು ಸಂಗ್ರಹಿಸಿದ್ದೇವೆ. ಆದರೆ ಬಿಜೆಪಿ ಶಾಸಕರು ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ 20 ದಿನಗಳ ಸಮಯ ನೀಡುತ್ತಿದ್ದೇವೆ. ಯಾವುದೇ ಕ್ರಮಕೈಗೊಳ್ಳದಿದ್ದಾರೆ ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ದೆಹಲಿಯಲ್ಲಿ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮಣ್ ಅವರು ಆರೋಪಿಸಿದ್ದರು.